Fake News - Kannada
 

ಚಿತ್ರದುರ್ಗದ ಗಣೇಶ ವಿಸರ್ಜನೆ ಮೆರವಣಿಗೆಯ ಹಳೆಯ ವೀಡಿಯೊವನ್ನು ಹರ್ಷ ಹತ್ಯೆಯ ವಿರುದ್ದ ಹಿಂದೂ ಸಂಘಟನೆಗಳ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೆ

0

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಸಾವಿರಾರು ಹಿಂದೂಪರ ಸಂಘಟನೆಗಳು ಪ್ರತಿಭಟನೆ ಎಂದು ಹಲವಾರು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವು ನಿಜವೇ ಪರಿಶೀಲಿಸೋಣ.

ಪ್ರತಿಪಾದನೆ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ವಿಡಿಯೋ.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಅಕ್ಟೋಬರ್ 2021 ರಲ್ಲಿ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯನ್ನು ತೋರಿಸುತ್ತದೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಹಳೆಯದಾಗಿದೆ ಮತ್ತು ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಅಕ್ಟೋಬರ್ 2021 ರಲ್ಲಿ ಹಲವಾರು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ ಮಾಡಿದ ಒಂದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊಗಳು ಕಂಡುಬಂದಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಚಿತ್ರದುರ್ಗದಲ್ಲಿ ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯ ದೃಶ್ಯಗಳು ಎಂದು ಉಲ್ಲೇಖಿಸಿದ್ದಾರೆ.

‘ಹಿಂದೂ ಮಹಾ ಗಣಪತಿ, ಚಿತ್ರದುರ್ಗ’ ಫೇಸ್‌ಬುಕ್ ಪುಟವು 02 ಅಕ್ಟೋಬರ್ 2021 ರಂದು ಇದೇ ರೀತಿಯ ದೃಶ್ಯಗಳನ್ನು ತೋರಿಸುವ ಅದೇ ವಿಡಿಯೊ ಮತ್ತು ಫೋಟೋಗಳನ್ನು ಹಂಚಿಕೊಂಡಿದೆ. ಹಲವಾರು ಸುದ್ದಿ ವೆಬ್‌ಸೈಟ್‌ಗಳು ಚಿತ್ರದುರ್ಗದಲ್ಲಿ 2021 ರ ಗಣೇಶ ವಿಸರ್ಜನಾ ಆಚರಣೆಗಳನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ, ಹರ್ಷ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳು ಕರ್ನಾಟಕದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಆದರೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೋ ಹಳೆಯದಾಗಿದ್ದು, ಹರ್ಷನ ಕೊಲೆಗೆ ಸಂಬಂಧಿಸಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ ಚಿತ್ರದುರ್ಗದಲ್ಲಿ ಹಿಂದೆ 2021 ರಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಹಳೆಯ ವೀಡಿಯೊವನ್ನು ಹರ್ಷ ಹತ್ಯೆಯ ವಿರುದ್ಧ ಹಿಂದೂಪರ ಕಾರ್ಯಕರ್ತರ ಪ್ರತಿಭಟನೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

Share.

Comments are closed.

scroll